ಬುಧವಾರ, ಸೆಪ್ಟೆಂಬರ್ 27, 2023

ಸುಝೋ: ಚೀನಾದ ವೆನಿಸ್

ನಾನು ಕೆಲಸ ಮಾಡುವ ಒಮಾನ್ ರಾಷ್ಟ್ರದ ಆಫೀಸಿನ ಬಿಜಿನೆಸ್ ಗೆ ಸಂಭಂದ ಪಟ್ಟಂತೆ ಒಮ್ಮೆ ಚೈನಾ ಪ್ರವಾಸಕ್ಕೆ ಹೋಗಿದ್ದೆ. ಈ ಪ್ರವಾಸದಲ್ಲಿ ಪ್ರಮುಖ ನಗರಗಳಾದ ಬೀಜಿಂಗ್, ಶಾಂಘೈ ಮತ್ತು ಸುಝೋ ನಗರಗಳಲ್ಲಿ ಭೇಟಿ ನೀಡುವ ಅವಕಾಶ ಒದಗಿಬಂದಿತ್ತು. ಒಟ್ಟು ಒಂದು ವಾರದ ಕೆಲಸ. ಮಸ್ಕತ್ ಗೆ ವಾಪಾಸು ಹಿಂದಿರುಗುವ ದಿನ ನಮ್ಮ ಆಥಿತೇಯ ಕಂಪನಿಯವರು ಪ್ರಾಚೀನ ಐತಿಹಾಸಿಕ ನಗರವಾದ ಸುಝೋ ನಗರದ ಪ್ರವಾಸವನ್ನು ಆಯೋಜಿಸಿದ್ದರು. ಸುಝೋ ನಗರ ಚೀನಾದ ಅತಿ ಪುರಾತನವಾದ ಸಾಂಸ್ಕೃತಿಕ ನಗರ. ಪೂರ್ವ ಚೀನಾದ ಜಿಯಾಂಗ್ಸು ಪ್ರಾಂತ್ಯದಲ್ಲಿ ಈ ನಗರವಿದೆ. ಕ್ರಿ.ಪೂ.514ರಲ್ಲಿ ಈ ನಗರವನ್ನು ನಿರ್ಮಾಣಮಾಡಿದ್ದರು ಎಂದು ಹೇಳಲಾಗುತ್ತಿದೆ. 15ನೇ ಶತಮಾನದ ಅಂತ್ಯದಿಂದ 19 ನೇ ಶತಮಾನದವರೆಗೆ, ಸುಝೋ ನಗರ ಚೀನಾದ ಆರ್ಥಿಕ, ಸಾಂಸ್ಕೃತಿಕ ಮತ್ತು ವಾಣಿಜ್ಯ ಕೇಂದ್ರವಾಗಿತ್ತು. ಈ ನಗರ ಇಂದಿಗೂ ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿನ ಐತಿಹಾಸಿಕ ಪುರಾತನ ನೀರಿನ ಕಾಲುವೆಗಳು, ಕಲ್ಲಿನ ಸೇತುವೆಗಳು, ಪಗೋಡಗಳು ಮತ್ತು ಸುಂದರ  ಉದ್ಯಾನವನಗಳು ಪ್ರಮುಖ ಪ್ರವಾಸಿ ಆಕರ್ಷಣೆಗಳು.

 

ಈ ನಗರವನ್ನು ಸಾಮಾನ್ಯವಾಗಿ "ವೆನಿಸ್ ಆಫ್ ದಿ ಈಸ್ಟ್" ಅಥವಾ "ವೆನಿಸ್ ಆಫ್ ಚೀನಾ" ಎಂದು ಕರೆಯಲಾಗುತ್ತದೆ. ಇದಕ್ಕೆ ಕಾರಣವೇನೆಂದರೆ, ಯುರೋಪಿನ ವೆನೀಸ್ ನಗರದಲ್ಲಿರುವಂತೆ ಇಲ್ಲಿಯೂ ಸಹ ಭಾಗಶಃ ನಗರ ನೀರಿನೊಳಗೆ ಇದೆ. ಇಲ್ಲಿನ ಕಾಲುವೆಗಳಲ್ಲಿ  ಸಂಚರಿಸಲು ದೋಣಿಗಳ ವ್ಯವಸ್ಥೆಯಿದೆ. ಕಾಲುವೆಯ ಇಕ್ಕೆಲಗಳಲ್ಲಿ ಮನೆಗಳಿವೆ, ಅಂಗಡಿಗಳಿವೆ, ಹೋಟೇಲ್ ರೆಸ್ಟಾರೆಂಟ್ ಗಳಿವೆ. ಈ ಪ್ರದೇಶದ ಸೌಂದರ್ಯವನ್ನು ಅನುಭವಿಸಲು  ದೋಣಿಯಲ್ಲಿಯೇ ಪ್ರಯಾಣಿಸಬೇಕು. ನಮ್ಮ ಪ್ರವಾಸದ ಸಮಯದಲ್ಲಿ ಈ ಕಾಲುವೆಯಲ್ಲಿ ನಾವು ಪ್ರಯಾಣಿಸುವಾಗ, ಇದರ ಕುರಿತು ಹಲವಾರು ಕುತುಹಲಕಾರಿ ವಿಷಯಗಳನ್ನು ತಿಳಿದುಕೊಂಡೆವು. ಈ ಕಾಲುವೆಗಳೆಲ್ಲ ದೊಡ್ಡದಾದ ಗ್ರ್ಯಾಂಡ್ ಕೆನಾಲ್ ಅನ್ನು ಸಂಪರ್ಕಿಸುತ್ತವೆ. ಸುಝೋ ನಗರದ ಕೆಲ ಭಾಗ ಈ ಬೃಹತ್ ನೀರಿನ ಕಾಲುವೆ ಆಕ್ರಮಿಸಿದೆ. ಈ ಕಾಲುವೆಗೆ ಸುಧೀರ್ಘವಾದ ಇತಿಹಾಸವಿದೆ. ಶತಶತಮಾನಗಳ ಹಿಂದೆ ಸುಲಭವಾಗಿ ಸರಕು ಸರಂಜಾಮುಗಳನ್ನು ಸರಬರಾಜು ಮಾಡಲು ಈ ಕಾಲುವೆಯನ್ನು ಕಟ್ಟಲಾಗಿದೆ ಎಂದು ಹೇಳುತ್ತಾರೆ. ಆದರೆ ಕೆಲವರ ಪ್ರಕಾರ ಅಂದಿನ ರಾಜಪರಿವಾರದವರಿಗೆ ನೂರಾರು ಕಿ.ಮಿ. ದೂರದ ಊರುಗಳಿಗೆ ರಸ್ತೆ ಮೂಲಕ ಪ್ರಯಾಣದಲ್ಲಿ ಕುದುರೆ, ಎತ್ತಿನಗಾಡಿ ಮುಂತಾದವುಗಳಲ್ಲಿ ಪ್ರಯಾಣಿಸಿದರೆ ವಿಪರೀತವಾದ ಮೈ ನೋವು ಬರುತಿತ್ತು, ಸುಸ್ತಾಗುತಿತ್ತು. ಇಂತಹ  ಧೀರ್ಘವಾದ ಪ್ರಯಾಣವನ್ನು ರಾಜಪರಿವಾರದ ಅದರಲ್ಲೂ ರಾಜ, ರಾಣಿ, ರಾಜಕುಮಾರಿ ಮತ್ತಿತರು ಕಾಲುವೆ ಮುಖಾಂತರ ಸುಲಭವಾಗಿ ಪ್ರಯಾಣ ಮಾಡಲು ನಿರ್ಮಿಸಲಾಯಿತು ಎಂದು ಹೇಳುತ್ತಾರೆ. ಅದೇನೆ ಇರಲಿ, ಈ ಕಾಲುವೆಯ ಉಪಯೋಗದಿಂದ ಚೀನಾದ ಆರ್ಥಿಕ ಪರಿಸ್ಥಿತಿ ತುಂಬಾ ಬಲಗೊಂಡಿತ್ತು ಎಂದು ಹಲವಾರು ಕಾಲಘಟ್ಟದಲ್ಲಿ ದಾಖಲಾಗಿದೆ.

 

ಈ ಕಾಲುವೆಯ ಉದ್ದ ಸುಮಾರು 1776 km (ಕಿ.ಮಿ) ನಷ್ಟು (ಬೀಜಿಂಗ್‌ನಿಂದ ಝೆಜಿಯಾಂಗ್ ಪ್ರಾಂತ್ಯದವರೆಗೆ), ಉದ್ದವಿದೆ. ಇದು ವಿಶ್ವದ ಅತಿ ಉದ್ದದ ದೊಡ್ಡ ಕಾಲುವೆಯಾಗಿದ್ದು, ಮಾನವ ನಿರ್ಮಿತ ಕೃತಕ ನದಿಯಾಗಿದೆ. ಬೀಜಿಂಗ್‌ನಿಂದ ಪ್ರಾರಂಭಿಸಿಟಿಯಾಂಜಿನ್ ಮತ್ತು ಹೆಬೈ, ಶಾಂಡೊಂಗ್, ಜಿಯಾಂಗ್ಸು ಮತ್ತು ಝೆಜಿಯಾಂಗ್ ಪ್ರಾಂತ್ಯಗಳ ಮೂಲಕ ಹಾಂಗ್‌ಝೌ ನಗರದವರೆಗೆ ಸಂಪರ್ಕ ಕಲ್ಪಿಸುತ್ತದೆ. ಕ್ರಿ.ಪೂ. 5 ನೇ ಶತಮಾನದಲ್ಲಿ ಇದನ್ನು ಮೊದಲು ಕಟ್ಟಲು ಪ್ರಾರಂಭಿಸಿದರು, ನಂತರ ಕ್ರಿ.ಶ. 581–618 ರಲ್ಲಿ ಮತ್ತು ಕ್ರಿ.ಶ. 1271–1633, ಹೀಗೆ ವಿವಿಧ ಕಾಲಘಟ್ಟದಲ್ಲಿ ಇಲ್ಲಿನ ರಾಜಮನೆತನಗಳು ಇದನ್ನು ವಿಸ್ತರಿಸುತ್ತ ಬಂದಿದ್ದಾರೆ.  ಈ ಕಾಲುವೆ  ಯುನೆಸ್ಕೋ (UNESCO) ವಿಶ್ವ ಪರಂಪರೆಯ ತಾಣವಾಗಿದೆ. ಈ ಕಾಲುವೆಯಲ್ಲಿ ಪ್ರಮುಖವಾಗಿ ಆಹಾರಧಾನ್ಯಗಳನ್ನು ಸಾಗಿಸಲಾಗುತಿತ್ತು. ಸೇನಾ ತುಕಡಿಗಳನ್ನು ಒಂದುಕಡೆ ಇನ್ನೊಂದು ಕಡೆಗೆ ಸಾಗಿಸಲು ಸಹ ಇದನ್ನ ಬಳಸುತಿದ್ದರು.  ಈ ಕಾಲುವೆಯಲ್ಲಿ ಸಂಚರಿಸಲು, ಅಂದಿನ ಕಾಲದಲ್ಲಿಯೇ ತಂತ್ರಜ್ನಾನವನ್ನು ಉಪಯೋಗಿಸಿ ಪ್ರಯಾಣಕ್ಕೆ ಸೂಕ್ತವಾದ ದೋಣಿಗಳನ್ನು ನಿರ್ಮಿಸುತಿದ್ದರು. ಸಾಗಾಣೆದಾರರು ಅಂದಿನ ಆಡಳಿತಗಾರರಿಗೆ, ಸುಂಕವನ್ನ ನೀಡಬೇಕಿತ್ತು. ಇದೊಂದು ಉತ್ತಮವಾದ ಆದಾಯವಾಗಿತ್ತು. ಈ ಸಾಗಾಟದ ಸಮಯದಲ್ಲಿ ದರೋಡೆಕೋರರು, ಲೂಟಿಕೋರರು ದಾಳಿಯಿಡುತಿದ್ದರಂತೆ, ಅವರಿಂದ ರಕ್ಷಿಸಲು ಅಲ್ಲಲ್ಲಿ ಸೈನಿಕರ ತುಕಡಿಗಳನ್ನ ನಿಯೋಜಿಸುತಿದ್ದರು. ಆದರೂ ಸಂಧರ್ಭ ನೋಡಿ, ಈ ದಾಳಿಕೋರರು ಆಹಾರಧಾನ್ಯಗಳು ಸೇರಿದಂತೆ ಮತ್ತಿತರ ವಸ್ತುಗಳನ್ನ ದರೋಡೆ ಮಾಡುತಿದ್ದರು.

 

ಒಂದು ಕಾಲದಲ್ಲಿ ಪ್ರತಿವರ್ಷ 8000 ಕ್ಕೂ ಹೆಚ್ಚಿನ ದೋಣಿಗಳು ಸಂಚರಿಸುತಿದ್ದ 1776 km (ಕಿ.ಮಿ) ಉದ್ದದ ಈ ಐತಿಹಾಸಿಕ ಕಾಲುವೆ ಕಾಲನ ಹೊಡೆತಕ್ಕೆ ಸಿಕ್ಕಿ, ಇಂದು ಹಾಳಾಗಿದೆ. ಕೆಲೆವೆಡೆ ಇದರ ಗುರುತುಗಳೇ ನಾಶವಾಗಿವೆ. ಕೆಲೆವೆಡೆ ಕಾಲುವೆ ಮುಚ್ಚಿ ಹೋಗಿದೆ. ಇಂದಿನ ಆಧುನಿಕ ಯುಗದಲ್ಲಿ ರಸ್ತೆ ರೈಲು ಮಾರ್ಗವನ್ನು ಯಥೇಚ್ಚವಾಗಿ ಉಪಯೋಗಿಸುತ್ತಿರುವುದರಿಂದ, ಎಲ್ಲೆಲ್ಲಿ ಅತಿ ಹೆಚ್ಚು ನೀರು ಇದೆಯೋ ಮತ್ತು ಸಂಪರ್ಕಯೋಗ್ಯವಿದೆಯೋ ಆ ಕಾಲುವೆ/ನದಿ ಮಾತ್ರ ಬಳಕೆಯಲ್ಲಿದೆ, ಮಿಕ್ಕಿದ್ದು ಹೂಳು ತುಂಬಿ ಮುಚ್ಚಿ ಹೋಗಿದೆ. ಕೆಲೆವೆಡೆ ಗುರುತೇ ಸಿಗದಷ್ಟು ಹಾಳಾಗಿದೆ. 12ನೇ ಶತಮಾನದ ಪ್ರಸಿದ್ದ ಪ್ರವಾಸಿಗ ಮಾರ್ಕೋಪೋಲೋ ಸೇರಿದಂತೆ ವಿವಿಧ ವಿದೇಶಿ ಪ್ರವಾಸಿಗರು ಈ ಐತಿಹಾಸಿಕ ಕಾಲುವೆ ಕುರಿತು ದಾಖಲಿಸಿದ್ದಾರೆ.

 

ಸುಝೋದಲ್ಲಿ, ಈ ಕಾಲುವೆ ಪ್ರಯಾಣದ ನಂತರ ವಿವಿಧ ಪ್ರವಾಸಿತಾಣಗಳಿಗೆ ನಮ್ಮ ಕರೆದುಕೊಂಡು ಹೋದರು. ಎಲ್ಲ ಸ್ಥಳಗಳು ಒಂದಕ್ಕಿಂತ ಒಂದು ಅದ್ಭುತವಾಗಿದ್ದವು. ಈ ಎಲ್ಲಾ ಸ್ಥಳಗಳು ನೂರಾರು ವರ್ಷಗಳ ಹಿಂದೆ ಕಟ್ಟಿದಂತಹವು. ಅವುಗಳನ್ನ ಇಂದಿಗೂ ಮೂಲ ಸ್ವರೂಪದಲ್ಲಿಯೇ ಉಳಿಸಿಕೊಂಡಿರುವುದು ಇಲ್ಲಿನ ವೈಶಿಷ್ಟ್ಯ. ಸುಝೋ ನಗರದ ಈ ಸ್ಥಳಗಳನ್ನ ನೋಡಿದೊಡನೆ, ಪುರಾತನ ಚೀನಾದ ನಗರವೊಂದನ್ನು ನೋಡಿದಂತಹ ಅನುಭವವಾಗುತ್ತದೆ.

 

*ಪ್ಯಾನ್ಮೆನ್ (ಪ್ಯಾನ್ ಗೇಟ್)*. ಪ್ಯಾನ್ಮೆನ್ ಎನ್ನುವ ಈ ರಮಣೀಯ ಪ್ರದೇಶವನ್ನು ಶಾಸ್ತ್ರೀಯ ಉದ್ಯಾನಗಳ ವಾಸ್ತುಶಿಲ್ಪದ ರಚನೆಯನ್ನು ಬಳಸಿಕೊಂಡು ಕೆಲವು ಐತಿಹಾಸಿಕ ತಾಣಗಳ ಆಧಾರದ ಮೇಲೆ ನಿರ್ಮಿಸಲಾಗಿದೆ. ಇಲ್ಲಿ  "ಮೂರು ಸುಂದರ ದೃಶ್ಯಾವಳಿಗಳನ್ನು" ನೋಡಬಹುದು. 1) ಪನ್ಮೆನ್ ಗೇಟ್, 2) ವೂ ಮೆನ್ ಸೇತುವೆ ಮತ್ತು 3) ರುಯಿಗುವಾಂಗ್ ಪಗೋಡಾ. ಪ್ಯಾನ್ಮೆನ್ ಗೇಟ್ ಸುಝೌನಲ್ಲಿ 2500 ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಸಿದ್ಧ ಐತಿಹಾಸಿಕ ಹೆಗ್ಗುರುತಾಗಿದೆ. ಇಂದಿಗೂ ಪ್ರಾಚೀನ ಕೋಟೆಗಳಲ್ಲಿ ಒಂದಾಗಿ ಇದು ಉಳಿದಿದೆ.  ಆಕರ್ಷಕವಾದ "ವು ಮೆನ್" ಸೇತುವೆಯು ಸುಝೌದಲ್ಲಿ ಅತಿ ಎತ್ತರವಾದ ಪುರಾತನ ಸೇತುವೆಯಾಗಿದೆ.  ಇದು ಸಾಂಗ್ ರಾಜವಂಶದ (ಕ್ರಿ.ಶ. 960-1279) ಸಮಯದಲ್ಲಿ ನಿರ್ಮಾಣ ಮಾಡಲಾಗಿದೆ. ಏಳು ಅಂತಸ್ತಿನ ಪಗೋಡವನ್ನು ಮರದ ವೇದಿಕೆಗಳೊಂದಿಗೆ ಇಟ್ಟಿಗೆಯಿಂದ ನಿರ್ಮಿಸಲಾಗಿದ್ದು, ಇಲ್ಲಿನ ಕಿರಿದಾದ ಮೆಟ್ಟಿಲುಗಳ ಮೇಲೆ ಹತ್ತಿದ ನಂತರ, ಸುಝೋ ನಗರದ ಹೃದಯಭಾಗವನ್ನು ನೋಡಬಹುದು. ಹಚ್ಚ ಹಸಿರಿನ ಸುಂದರವಾದ ಉದ್ಯಾನವನಗಳು, ನೀರಿನ ಕಾಲುವೆಗಳು ಇತ್ಯಾದಿಗಳನ್ನ ಕಣ್ತುಂಬಿಕೊಳ್ಳಬಹುದು.

 

*ಟೈಗರ್ ಹಿಲ್:* ಟೈಗರ್ ಹಿಲ್ ಸುಝೋ ನಗರದ ಒಂದು  ಪ್ರವಾಸಿಗರ ಆಕರ್ಷಣೆಯಾಗಿದೆ. ಇದಕ್ಕೆ 2500 ವರ್ಷಗಳ ಇತಿಹಾಸವಿದೆ. ಇಲ್ಲಿಯೂ ಸಾಕಷ್ಟು  ಪುರಾತನ ವಾಸ್ತುಶಿಲ್ಪಗಳನ್ನು ನೋಡಬಹುದು. 2500 ವರ್ಷಗಳ ಹಿಂದೆ ಇಲ್ಲಿನ ಒಂದು ಯುದ್ದದಲ್ಲಿ ಈ ಪ್ರಾಂತ್ಯದ ರಾಜನೊಬ್ಬ  ಮರಣಹೊಂದುತ್ತಾನೆ. ಅವನ ಮಗ "ಫೂ ಚಾಯ್"ಅವನನ್ನು ಸರ್ಜಿಂಗ್ ಸೀ ಹಿಲ್‌ ಎನ್ನುವ ಈ ಪ್ರದೇಶದಲ್ಲಿ ಸಮಾಧಿ ಮಾಡುತ್ತಾನೆ. ಮೂರು ದಿನಗಳ ನಂತರ ಇಲ್ಲಿಗೆ  ಬಿಳಿ ಹುಲಿಯೊಂದು  ಬಂದಿತು ಎಂಬ ಐತಿಹ್ಯವಿದೆ. ಆದ್ದರಿಂದ ಜನರು ಅಂದಿನಿಂದ ಅದನ್ನು ಟೈಗರ್ ಹಿಲ್ ಎಂದು ಮರುನಾಮಕರಣ ಮಾಡಿದ್ದಾರೆ.

 



*ಹನ್ಶನ್ ದೇವಾಲಯ:* ಹನ್ಶನ್ ದೇವಾಲಯ, ಸುಝೌನಲ್ಲಿರುವ ಬೌದ್ಧ ದೇವಾಲಯವಾಗಿದೆ. ಲಿಯಾಂಗ್ ರಾಜವಂಶದಲ್ಲಿ (A.D. 502-557) ಮೊದಲು ನಿರ್ಮಿಸಲಾದ ದೇವಾಲಯಕ್ಕೆ ಟ್ಯಾಂಗ್ ರಾಜವಂಶದ ಕವಿ-ಸನ್ಯಾಸಿಯ ಹೆಸರನ್ನು ಇಡಲಾಗಿದೆ. ಇಲ್ಲಿ ಹಿಂದೂ ಧರ್ಮದ ಪದ್ದತಿಯಂತೆ ಮೂರ್ತಿ ಪೂಜೆಯನ್ನ ಕಾಣಬಹುದು. ಬುದ್ದನಿಗೆ ದೂಪಫಲ ಪುಷ್ಫ ಇತ್ಯಾದಿಗಳನ್ನ ಅರ್ಪಿಸುತ್ತಾರೆ. ದೇವಾಲಯದ ಪ್ರಾಂಗಣ, ಗಂಟೆ, ಗರ್ಭಗುಡಿ, ಎಲ್ಲವೂ ಭಾರತದಲ್ಲಿನ ದೇವಾಲಯದಂತೆ ಚೈನೀಸ್ ಶೈಲಿಯಲ್ಲಿ ಕಟ್ಟಿರುವುದು ವಿಶೇಷ. ಚೀನಾದಲ್ಲಿ ಕಮ್ಯುನಿಸ್ಟ್ ಸರ್ಕಾರ ಆಡಳಿತಕ್ಕೆ ಬಂದಾಗ, ಈ ಪುರಾತನ ದೇವಾಲಯ ಸೇರಿದಂತೆ ದೇಶದ ಎಲ್ಲಾ ದೇವಾಲಯ, ಚರ್ಚ್ ಮತ್ತು ಮಸೀದಿಗಳನ್ನ 1950 ರಿಂದ 1979ರವರೆಗೆ ಕಾಲ ಮುಚ್ಚಿದ್ದರು.

 

ಸುಝೌವನ್ನು *"ಉದ್ಯಾನಗಳ ನಗರ"* ಎಂದು ಸಹ ಕರೆಯಲಾಗುತ್ತದೆ. 16ನೇ ಶತಮಾನದಲ್ಲಿ 170 ಉದ್ಯಾನಗಳು ಈ ನಗರದಲ್ಲಿವಂತೆ. ಈಗ ಅಂದಾಜು 50 ಖಾಸಗಿ ಮತ್ತು ಸರ್ಕಾರಿ ಉದ್ಯಾನವನಗಳಿವೆ. ಈ ಎಲ್ಲಾ ಉದ್ಯಾನವನಗಳನ್ನು ತೋಟಗಾರಿಕೆಯ ವಿಶ್ವ ಇತಿಹಾಸದಲ್ಲಿ ಶ್ರೇಷ್ಠ ಮೇರುಕೃತಿಗಳು ಎಂದು ಗುರುತಿಸಲಾಗಿದೆ. ಅವುಗಳಲ್ಲಿ ಒಂಬತ್ತು ಉದ್ಯಾನವನಗಳನ್ನು ವಿಶ್ವ ಸಾಂಸ್ಕೃತಿಕ ಪರಂಪರೆಗಳಲ್ಲಿ ಪಟ್ಟಿ ಮಾಡಲಾಗಿದೆ. ಚೀನೀ ಉದ್ಯಾನ ಸಂಸ್ಕೃತಿಯ ಹೆಮ್ಮೆಯೆಂದು ಗುರುತಿಸಲ್ಪಡುವ  ಹಂಬಲ್ ಅಡ್ಮಿನಿಸ್ಟ್ರೇಟರ್ಸ್ ಗಾರ್ಡನ್ ಮತ್ತು ಲಿಂಗರಿಂಗ್ ಗಾರ್ಡನ್  ಇಂದಿಗೂ ಪ್ರವಾಸಿಗರ ಮೆಚ್ಚಿನ ತಾಣಗಳಾಗಿವೆ.

 

*ಹಂಬಲ್ ಅಡ್ಮಿನಿಸ್ಟ್ರೇಟರ್ಸ್ ಗಾರ್ಡನ್* ಅನ್ನು ಕ್ರಿ.ಶ 1509 ರಲ್ಲಿ ನಿರ್ಮಿಸಲಾಯಿತು.  ಇದು ಸುಝೋದಲ್ಲಿನ ಅತಿದೊಡ್ಡ ಶಾಸ್ತ್ರೀಯ ಸಾಂಪ್ರದಾಯಿಕ ಉದ್ಯಾನವನವಾಗಿದೆ. ಇಡೀ ಉದ್ಯಾನವು ನೀರಿನ ಕೊಳ, ಕಾಲುವೆಗಳಿಂದೆ, ಆಕರ್ಷಕ ಕಲ್ಲು ಬಂಡೆಗಳು, ಮಂಟಪಗಳು, ವಿವಿಧ ರೀತಿಯ ಸುಂದರವಾದ ಹೂವಿನ ಗಿಡಗಳು, ಆಕರ್ಷಕ ಮರಗಿಡಗಳಿಂದ ಕೂಡಿದ ಇಲ್ಲಿನ ದೃಶ್ಯಾವಳಿ ಮನಸ್ಸಿಗೆ ಮುದ ನೀಡುತ್ತವೆ. ಅಂಕುಡೊಂಕಾದ ಹಾದಿಯಲ್ಲಿ ನಡೆಯುತ್ತಾ ಮುಂದೆ ಹೋದಂತೆ , ಪ್ರತಿಯೊಂದು ಹೆಜ್ಜೆಗೂ ವಿಭಿನ್ನ ದೃಶ್ಯಾವಳಿಗಳು ಗೋಚರಿಸುತ್ತವೆ.  ರಮಣೀಯ ಮತ್ತು ಶಾಂತಿಯುತ, ಉದ್ಯಾನದಲ್ಲಿ  ಪ್ರತಿಯೊಂದು ವಸ್ತುವೂ  ಹಿಂದಿನ ಕಥೆಯನ್ನು ಹೇಳುತ್ತದೆ.

 

*ಲಿಂಗರಿಂಗ್ ಗಾರ್ಡನ್* (ಲಿಯುವಾನ್ ಗಾರ್ಡನ್) ಚೀನಾದಲ್ಲಿ ಅತಿ ದೊಡ್ಡ ಪ್ರಮಾಣದ ಕ್ಲಾಸಿಕಲ್ ಖಾಸಗಿ ಉದ್ಯಾನವಾಗಿದ್ದು, 23300 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ, ಇದು ಕ್ವಿಂಗ್ ರಾಜವಂಶದ ಶೈಲಿಯ ವಿನ್ಯಾಸವನ್ನು ಪ್ರತಿನಿಧಿಸುತ್ತದೆ.  ಸೊಗಸಾದ ವಾಸ್ತುಶಿಲ್ಪ ಕಲೆ, ಭವ್ಯವಾದ ಸಭಾಂಗಣಗಳು ಮತ್ತು ಸುಂದರವಾದ ಗಾರ್ಡೆನ್ ಅಂಗಳಗಳಿಗೆ ಹೆಸರುವಾಸಿಯಾಗಿದೆ. ಈ ಗಾರ್ಡನ್ ಅನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಪೂರ್ವದಲ್ಲಿ ಮುಖ್ಯವಾಗಿ ವಾಸ್ತುಶಿಲ್ಪ, ಮಧ್ಯದಲ್ಲಿ ವಿಶಾಲವಾದ ಉದ್ಯಾನವನ, ಪಶ್ಚಿಮವು ಕಲ್ಲು ಬಂಡೆಗಳಿಂದ ಕೂಡಿದ ಮತ್ತು ಉತ್ತರಕ್ಕೆ ಗ್ರಾಮೀಣ ದೃಶ್ಯಾವಳಿಗಳು ಕಾಣುವಂತೆ ವಿನ್ಯಾಸಗೊಳಿಸಲಾಗಿದೆ.

 

*ರೇಷ್ಮೆ ನಗರಿ:-* ಸಾವಿರಾರು ವರ್ಷಗಳಿಂದ, ಸುಝೋ ನಗರದ ಜನರು ಅದ್ಭುತವಾದ ರೇಷ್ಮೆಬಟ್ಟೆಗಳನ್ನುತಯಾರಿಸುವ ಕೌಶಲ್ಯಗಳನ್ನು ಕರಗತ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. 4700 ವರ್ಷಗಳ ಹಿಂದೆ ಇಲ್ಲಿ ರೇಷ್ಮೆ ಉಪಯೋಗದಲ್ಲಿತ್ತು ಎಂದು ಉತ್ಖನನದ ವೇಳೇ ದೊರೆತ ಅವಶೇಷಗಳಿಂದ ಸಾಬೀತು ಪಡಿಸಲಾಗಿದೆ. ಹೀಗಾಗಿ ಸುಝೋ ನಗರವನ್ನು ಸಿಲ್ಕ್ ಸಿಟಿ ಎಂದು ಕರೆಯುವುದಲ್ಲದೆ ಇಲ್ಲಿ ಸಿಲ್ಕ್ ರೋಡ್ ಇತ್ತು ಎಂದು ಹೇಳಲಾಗುತ್ತಿದೆ. 1991 ರಲ್ಲಿ ನಿರ್ಮಿಸಲಾದ ಸುಝೋ ಸಿಲ್ಕ್ ಮ್ಯೂಸಿಯಂ ಚೀನಾದಲ್ಲಿ ರೇಷ್ಮೆಯ ಕುರಿತಾದ ಮೊದಲ ವಸ್ತು ಸಂಗ್ರಹಾಲಯವಾಗಿದೆ. ಇಲ್ಲಿ ಚೀನಾದ 7000 ವರ್ಷಗಳ ರೇಷ್ಮೆ ಇತಿಹಾಸವನ್ನು ತಿಳಿದುಕೊಳ್ಳಬಹುದು, ರೇಷ್ಮೆ ಹುಳುಗಳ ಜೀವನ, ಸಾಂಪ್ರದಾಯಿಕ ರೇಷ್ಮೆ ನೇಯ್ಗೆ ಕೌಶಲ್ಯವನ್ನು ವೀಕ್ಷಿಸಬಹುದು.

 

ಹೀಗೆ ಚೀನಾದ ಪ್ರವಾಸದ ವೇಳೆ ಹಲವಾರು ವಿಷಯಗಳನ್ನು ತಿಳಿದುಕೊಳ್ಳುವ ಅವಕಾಶ ನಮಗೆ ಒದಗಿಬಂತು.  ಚೀನಾದ ಹಳೆಯ ಚಲನ ಚಿತ್ರಗಳಲ್ಲಿ ಚೈನಾದ ಸಾಂಪ್ರದಾಯಿಕ  ಊರುಗಳು, ಕಟ್ಟಡಗಳನ್ನು ನೋಡಿದ್ದ ನಮಗೆ ಪ್ರತ್ಯಕ್ಷವಾಗಿ ಸುಝೋದಲ್ಲಿ ಅಂತಹ ಸ್ಥಳಗಳನ್ನು ಕಾಣುವಂತಾಯಿತು. ಒಂದೆಡೆ ಗಗನಚುಂಬಿ ಆಧುನಿಕ ಕಟ್ಟಡಗಳು, ಮೆಟ್ರೋ ಟ್ರೈನ್, ಮೋನೋ ರೈಲ್, ಎಕ್ಸ್ಪ್ರೆಸ್ ಹೆದ್ದಾರಿ, ದೊಡ್ಡದಾದ ಫ್ಲೈ ಓವರ್ ಗಳು ಮತ್ತೊಂದೆಡೆ ಸಾಂಪ್ರದಾಯಿಕ ಶೈಲಿಯ ಪುರಾತನ ನಗರ ಜೀವನವನ್ನು ಕಣ್ತುಂಬಿಕೊಳ್ಳುವ ಅನುಭವಾಯಿತು.

 

ಬರಹ:- ಪಿ.ಎಸ್.ರಂಗನಾಥ

ಮಸ್ಕತ್ - ಒಮಾನ್ ರಾಷ್ಟ್ರ

 

 

 































ಕೃಷಿ ಸ್ವಾವಲಂಬನೆಯತ್ತ ಅರಬ್ ರಾಷ್ಟ್ರಗಳು



ಅರಬ್ ರಾಷ್ಟ್ರಗಳಾದ ಸೌದಿ ಅರೇಬಿಯಾ, ಕುವೈತ್, ಕತಾರ್, ಒಮಾನ್, ಬಹರೈನ್, ಯುಏಇ ಮತ್ತಿತರ ರಾಷ್ಟ್ರಗಳು ನಮ್ಮ ಭಾರತದಂತೆ ವೈವಿಧ್ಯಮಯ ಭೂಪ್ರದೇಶವನ್ನು ಹೊಂದಿಲ್ಲ ಇಲ್ಲಿನ ಬಹುತೇಕ ಜಾಗ ಮರುಭೂಮಿಯಿಂದ ಆವೃತವಾಗಿದೆ, ಮಳೆ ಬಹಳ ವಿರಳ, ನದಿ ಸರೋವರಗಳು ಇಲ್ಲಿ ಬಹಳ ಕಡಿಮೆ.  ಏಳೆಂಟು ತಿಂಗಳು ಬೇಸಿಗೆ ಕಾಲ, ಆ ಸಮಯದಲ್ಲಿ ಅತಿ ಹೆಚ್ಚು ಎಂದರೆ 40-55 ಡಿಗ್ರಿ .ಸೆಲ್ಶಿಯಸ್ ನಷ್ಟು ತೀಕ್ಷ್ಣವಾದ ಬಿಸಿಲು. ಇಂತಹ ವೈರುಧ್ಯಮಯವಾದ ವಾತಾವರಣದಲ್ಲಿ ಬೆಳೆ ಬೆಳೆಯುವುದು ಬಹಳ ಕಷ್ಟ. ಇಲ್ಲಿ ತೈಲ ಆವಿಷ್ಕಾರ ವಾಗುವವರೆಗೂ ನೂರಾರು ವರ್ಷಗಳಿಂದ ಇಲ್ಲಿನ ಜನರು ಭಾರತದಂತಹ ರಾಷ್ಟ್ರಗಳನ್ನ ಅಗತ್ಯ ವಸ್ತುಗಳಿಗಾಗಿ  ಅವಲಂಬಿಸಿದ್ದರು. ಆದರೆ, ಇಪ್ಪತ್ತನೇ ಶತಮಾನದಲ್ಲಿ ತೈಲದ ಆವಿಷ್ಕಾರದ ನಂತರ ಇಲ್ಲಿಯ ಬದುಕಿನ ಚಿತ್ರಣ ಸಂಪೂರ್ಣವಾಗಿ ಬದಲಾಗಿದೆ. ತೈಲದ ಬೇಡಿಕೆ ದಿನೇ ದಿನೇ ಹೆಚ್ಚಿದಂತೆಲ್ಲ ತೈಲ ಉತ್ಪಾದನೆ ಹೆಚ್ಚಾಯಿತು. ಈ ತೈಲ ಮಾರಿ ಬಂದ ಹಣದಲ್ಲಿ ಇಲ್ಲಿನ ಮೂಲ ಭೂತ ಸೌಕರ್ಯಗಳನ್ನ ಅಭಿವೃದ್ದಿ ಪಡಿಸಿದ್ದಲ್ಲದೆ, ದೇಶಕ್ಕೆ ಬೇಕಾದ ಎಲ್ಲ ರೀತಿಯ ಸುಸಜ್ಜಿತ ವ್ಯವಸ್ಥೆಗಳನ್ನ ನಿರ್ಮಿಸಿ ಕೊಳ್ಳುತ್ತ ಬಂದಿದ್ದಾರೆ. ಜನರಿಗೆ ಬೇಕಾದ ಎಲ್ಲಾ ರೀತಿಯ ಅಗತ್ಯ ಉತ್ಪನ್ನಗಳನ್ನು  ಪ್ರಪಂಚದ ಮೂಲೆ ಮೂಲೆಗಳಿಂದ ಮಾತ್ರವಲ್ಲದೆ ಅಮೇರಿಕ, ಆಸ್ಟ್ರೇಲಿಯಾ, ಯೂರೋಪ್ ರಾಷ್ಟ್ರಗಳ ಉತ್ತಮ ಗುಣಮಟ್ಟದ ಹಣ್ಣು ತರಕಾರಿ, ದಿನಸಿ ವಸ್ತುಗಳನ್ನು ಆಮದು ಮಾಡಿಕೊಳ್ಳುತಿದ್ದಾರೆ. ಇಲ್ಲಿನ ಸೂಪರ್ ಮಾರ್ಕೆಟ್ ಗಳು, ಮಾಲ್ ಗಳಲ್ಲಿ ದೇಶ ವಿದೇಶಗಳ ವಸ್ತುಗಳು ದೊರೆಯುತ್ತಿವೆ.

 

ಅರಬ್ ರಾಷ್ಟ್ರಗಳಲ್ಲಿ ಕೇವಲ ಮರುಭೂಮಿ ಮತ್ತು ತೈಲ ನಿಕ್ಷೇಪಗಳು ಮಾತ್ರವಲ್ಲದೆ ಕೆಲ ಪ್ರದೇಶಗಳಲ್ಲಿ ಫಲವತ್ತಾದ ಕೃಷಿ ಭೂಮಿಗಳು ಸಹ ಇವೆ. ಹೀಗಾಗಿ ಅಲ್ಲಿನ ಹವಾಮಾನಕ್ಕೆ ತಕ್ಕಂತೆ ಬೆಳೆಯುವ ಬೆಳೆಗಳನ್ನು ಬೆಳೆಯುತಿದ್ದಾರೆ. ಕೆಲೆವೆಡೆ ಕೃಷಿ ಭೂಮಿ ಸೇರಿದಂತೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಅತ್ಯುನ್ನತ ತಂತ್ರಜ್ನಾನವನ್ನು ಉಪಯೋಗಿಸುತಿದ್ದಾರೆ. ಇವೆಲ್ಲವನ್ನ ಕಣ್ಣಾರೆ ನೋಡಿದಾಗ ಕೃಷಿಯನ್ನು ಹೀಗೂ ಮಾಡಬಹುದಾ ಎಂದು ಆಶ್ಚರ್ಯವಾಗುತ್ತದೆ.

 ಮರುಭೂಮಿಯಲ್ಲಿ ಅದ್ಭುತವಾದ ಬೆಳೆ ತೆಗೆಯುತ್ತಿರುವ ಸೌದಿ ಅರೇಬಿಯಾ

ಸೌದಿ ಅರೇಬಿಯಾದ ಭೂಪ್ರದೇಶದ ಸುಮಾರು 1.5% ಮಾತ್ರ ಕೃಷಿ ಮಾಡಲು ಯೋಗ್ಯವಾಗಿದೆ. ಹೀಗಾಗಿ ದೇಶದ ಅಗತ್ಯ ಆಹಾರ ಪೂರೈಕೆಯ 80% ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುತ್ತಿದೆ. ಆದರೆ ಮುಂದೊಂದು ದಿನ ಜಾಗತಿಕ ಆಹಾರ ಪೂರೈಕೆ ಜಾಲದಲ್ಲಿ ಏನಾದರು ಕುಸಿತ ಕಂಡರೆ ದೇಶ ಅಪಾಯಕ್ಕೆ ಸಿಲುಕುವ ಸಂಭವನೀಯತೆ ಹೆಚ್ಚಿರುತ್ತದೆ. ಹೀಗಾಗಿ ಜಾಗತಿಕ ಆಹಾರ ಪೂರೈಕೆ ಜಾಲದ ಸಂಭವನೀಯ ಅಪಾಯಗಳನ್ನು ಮನಗಂಡು ಆಹಾರ ಭದ್ರತೆ ಗಾಗಿ ಅತ್ಯುನ್ನತ ವಿದೇಶಿ ತಂತ್ರಜ್ನಾನವನ್ನು ಉಪಯೋಗಿಸಿ ಮರುಭೂಮಿಯನ್ನು ಕೃಷಿಭೂಮಿಯನ್ನಾಗಿ ಸೌದಿ ಅರೇಬಿಯಾ ಪರಿವರ್ತಿಸುತ್ತಿದೆ.  ಇದರ ಪರಿಣಾಮ ಕೆಲೆವೆಡೆ ನೂರಾರು ಕಿ.ಮಿ.ಗಳಷ್ಟು ಉದ್ದಕ್ಕೂ ಕೃಷಿ ಚಟುವಟಿಕೆಯನ್ನು ಇಂದು ಕಾಣಬಹುದಾಗಿದೆ. ಇದರಿಂದಾಗಿ ಆಹಾರಕ್ಕಾಗಿ ಸಂಪೂರ್ಣ ಸುಸ್ಥಿರ ಸ್ವಾವಲಂಬನೆಯತ್ತ ಹೆಜ್ಜೆಹಾಕುತ್ತಿದೆ.

 

ತುಬರ್ಜಲ್  ಎನ್ನುವ ಪ್ರದೇಶದಲ್ಲಿ ಲಕ್ಷಾಂತರ ಎಕರೆ ಮರುಭೂಮಿ ಇಂದು ಕೃಷಿಭೂಮಿಯಾಗಿ ಪರಿವರ್ತಿತ ಗೊಂಡಿದೆ. 300 ರಿಂದ 500 ಮೀಟರ್ ತ್ರಿಜ್ಯದ ವೃತ್ತಾಕಾರದಲ್ಲಿ ಈ ಕೃಷಿ ಭೂಮಿಗಳಿವೆ. ಗೂಗಲ್ ಮ್ಯಾಪ್ ನಲ್ಲಿ ನೋಡಿದರೆ ಚುಕ್ಕಿಗಳಂತೆ ಕಾಣುವ ಈ ಪ್ರದೇಶ ಸಾವಿರಾರು ಚದರ ಕಿ.ಮಿ. ನಷ್ಟು ಹರಡಿಕೊಂಡಿದೆ ಎಂದರೆ ನಂಬಲು ಸಾಧ್ಯವಾಗುವುದಿಲ್ಲ. ಇಲ್ಲಿ ಕೃಷಿ ಚಟುವಟಿಕೆಗೆ ಬೇಕಾದ ನೀರಿಗಾಗಿ ಬೋರ್ ವೆಲ್ ಗಳನ್ನು ಕೊರೆಯಲಾಗಿದೆ. ಇದರಿಂದ ಭೂಮಿಯ ಆಳದಲ್ಲಿರುವ ನೀರನ್ನು ತೆಗೆದು 300 ಮೀಟರ್ ರಿಂದ 500 ಮೀಟರ್ ತ್ರಿಜ್ಯದಲ್ಲಿ ವೃತ್ತಾಕಾರದ ಸಿಂಪರಣಾ ವ್ಯವಸ್ಥೆಯ ಮುಖಾಂತರ ಅಥವಾ ಸೆಂಟರ್-ಪಿವೋಟ್ ನೀರಾವರಿ ಪದ್ದತಿಯಿಂದ ಬೆಳೆಗಳಿಗೆ ನೀರನ್ನು ಪೂರೈಸಲಾಗುತ್ತಿದೆ. ಅಷ್ಟೇ ಅಲ್ಲದೆ ಹನಿ ನೀರಾವರಿ ಪದ್ದತಿ, ಸ್ಪ್ರಿಂಕ್ಲರ್ ಇನ್ನು ಮುಂತಾದ ತಂತ್ರಜ್ನಾನವನ್ನು ಉಪಯೋಗಿಸಿ ಬೆಳೆಗಳಿಗೆ ನೀರುಣಿಸುತಿದ್ದಾರೆ. ಬಹುತೇಕ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಇಲ್ಲಿ ಉಪಯೋಗಿಸುವುದರಿಂದ ಹೆಚ್ಚಿನ ಕೃಷಿ ಕಾರ್ಮಿಕರ ಅಗತ್ಯತೆ ಕಂಡು ಬರುತ್ತಿಲ್ಲ. ನೀರಿನ ಬಳಕೆಯೂ ಇಲ್ಲಿ ಕಡಿಮೆ. ಇಲ್ಲಿ, ವಿವಿಧ ರೀತಿಯ ಹಣ್ಣು, ಹೂವು ತರಕಾರಿ, ಖರ್ಜೂರ, ಧವಸ ಧಾನ್ಯಗಳಾದ ಗೋಧಿ, ಬಾರ್ಲಿಯನ್ನು ಬೆಳೆಯಲಾಗುತ್ತಿದೆ. ಇಲ್ಲಿ ಬೆಳೆಯುವ 100% ಎಲ್ಲಾ ಕೃಷಿ ಉತ್ಪನ್ನಗಳು ದೇಶದೊಳಗೆ ಸರಬರಾಜಾಗುತಿದ್ದು, ಹೆಚ್ಚುವರಿ ಉತ್ಪನ್ನಗಳನ್ನ ಪಕ್ಕದ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ. ಸಾಂಪ್ರದಾಯಿಕ ಕೃಷಿಯ ಜತೆಗೆ, ನೂತನ ತಂತ್ರಜ್ನಾನಗಳಾದ ಹೈಡ್ರೋಪೋನಿಕ್ಸ್ ಮತ್ತು ಏರೋಪೋನಿಕ್ಸ್ ಅನ್ನು ಕೆಲೆವೆಡೆ ಅಳವಡಿಸಿಕೊಂಡು ಕೃಷಿಮಾಡಲಾಗುತ್ತಿದೆ.

 ಒಮಾನ್ ರಾಷ್ಟ್ರವೂ ಸಹ ಕೃಷಿ ಸ್ವಾವಲಂಬನೆಯತ್ತ ದಾಪುಗಾಲು ಹಾಕುತ್ತಿದೆ.

 ಒಮಾನ್ ನಲ್ಲಿಯೂ ಸಹ ವಿವಿಧ ತರಹದ ಹೂ, ಹಣ್ಣು ಸೊಪ್ಪುಗಳನ್ನ ಬೆಳೆಯಲಾಗುತ್ತಿದೆ. ಇಲ್ಲಿಯೂ ಲಕ್ಷಾಂತರ ಎಕರೆಯಷ್ಟು ಕೃಷಿ ಭೂಮಿಯಿದೆ. ಈ ತೋಟಗಳಲ್ಲಿ ಗೋಧಿ, ಬಾರ್ಲಿ, ಖರ್ಜೂರ, ಬಾಳೆಹಣ್ಣು, ಮಾವಿನಹಣ್ಣು, ಸೀಬೆ ಹಣ್ಣು, ಸಪೋಟ, ಪಪ್ಪಾಯ, ಕಲ್ಲಂಗಡಿ ಹಣ್ಣು, ದಾಳಿಂಬೆ, ಕರಭೂಜ, ಸೋರೆಕಾಯಿ, ಕುಂಬಳ್ಕಾಯಿತೆಂಗಿನಕಾಯಿ, ಕೊತ್ತಂಬರಿ, ಪುದಿನ, ಲೆಟ್ಟ್ಯೂಸ್, ಬದನೆಕಾಯಿ, ಟೊಮಾಟೋ, ಕ್ಯಾಪ್ಸಿಕಮ್, ನಿಂಬೆಹಣ್ಣು, ನುಗ್ಗೆಕಾಯಿ, ಆಲೂಗಡ್ಡೆ ಮುಂತಾದವಗಳನ್ನು ಇಲ್ಲಿ ಬೆಳೆಯುತ್ತಾರೆ. ಉತ್ಸಾಹಿ ಒಮಾನಿ ಕೃಷಿಕರು ವಿವಿಧ ರೀತಿಯ ಪ್ರಯೋಗಗಳನ್ನ ನಡೆಸುತ್ತಿರುವುದು ವಿಶೇಷ. ಮಲೆನಾಡಿನಲ್ಲಿ ಬೆಳೆಯುವ ಹಲಸಿನ ಹಣ್ಣನ್ನು ಸಹ ಇಲ್ಲಿ ಬೆಳೆದು ಯಶಸ್ಸು ಕಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ಅಂಜೂರದ ಹಣ್ಣುಗಳು, ಏಪ್ರಿಕಾಟ್ಗಳು, ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಸಹ ಬೆಳೆಯುತ್ತಿರುವುದು ವಿಶೇಷವಾಗಿದೆ, ಯಾಕೆಂದರೆ ಇಲ್ಲಿನ ವಾತಾವರಣ ಅತಿ ಬಿಸಿಲಿನಿಂದ ಕೂಡಿದ್ದು, ಇಂತಹ ಅತಿ ಕಡಿಮೆ ಮಳೆ ಪ್ರದೇಶದಲ್ಲಿ ಇಂತಹವುಗಳನ್ನ ಬೆಳೆಯಲು ಸಾಧ್ಯವಾಗಿದ್ದೆ ವಿಶೇಷವೆಂದೇ ಹೇಳಬೇಕು.

 

ಕೆಲೆವೆಡೆ ಹನಿ ನಿರಾವರಿ ಪದ್ದತಿ, ಸ್ಪ್ರಿಂಕ್ಲರ್ ವ್ಯವಸ್ಥೆ, ವೃತ್ತಾಕಾರದ ಸಿಂಪರಣಾ ವ್ಯವಸ್ಥೆಯ ಜತೆಗೆ ಕೆಲೆವೆಡೆ ಹೈಡ್ರೋಪೋನಿಕ್ಸ್ ಮತ್ತು ಏರೋಪೋನಿಕ್ಸ್ ನಂತಹ ತಂತ್ರಜ್ನಾನಗಳನ್ನು ಉಪಯೋಗಿಸಲಾಗುತ್ತಿದೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ವಿಷಯವೇನೆಂದರೆ, ತಂತ್ರಜ್ನಾನವನ್ನು ಉಪಯೋಗಿಸಿ ಈ ರಾಷ್ಟ್ರಗಳಲ್ಲಿ ಬೆಳೆಯುವ ಕೃಷಿ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ್ದಾಗಿವೆ.

 

ಒಮಾನ್ ರಾಷ್ಟ್ರದ ಬೆಟ್ಟ ಗುಡ್ಡಗಾಡು ಪ್ರದೇಶಗಳ ಬುಡದಲ್ಲಿ ವರ್ಷಪೂರ್ತಿ ನೈಸರ್ಗಿಕವಾಗಿ ಹರಿಯುವ ಸಾವಿರಾರು ನೀರಿನ ಝರಿಗಳಿವೆ, ಈ ನೀರನ್ನು ಕೃಷಿಗಾಗಿ ಬಳಕೆ ಮಾಡಲಾಗುತ್ತಿದ್ದು, ಮಿಕ್ಕ ಕೆಲೆವೆಡೆ ಬೋರ್ ವೆಲ್ ಗಳನ್ನು ಕೊರೆದು ಕೃಷಿಗಾಗಿ ನೀರನ್ನು ಬಳಸಿಕೊಳ್ಳಲಾಗುತ್ತಿದೆ. ದುಬೈ ನಿಂದ ಒಮಾನ್ ರಾಷ್ಟ್ರದ ಮಸ್ಕತ್ ಗೆ ರಸ್ತೆಯಲ್ಲಿ ಪ್ರಯಣಿಸುವಾಗ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಕಿ.ಮಿ. ದೂರದಷ್ಟು ಹಚ್ಚ ಹಸಿರಿನಿನ ತೋಟಗಳನ್ನು ಕಾಣಬಹುದು, ಇದೇ ರೀತಿ ಸಲಾಲ್ಹ, ಸೂರ್, ನಿಜ್ವ ಮುಂತಾದ ಪ್ರದೇಶಗಳಲ್ಲಿಯೂ ಸಹ ಹೊಲಗದ್ದೆಗಳಿವೆ. ಸಲಾಲ್ಹ ಪ್ರದೇಶವಂತೂ ನಮ್ಮ ಸಹ್ಯಾದ್ರಿ ತಪ್ಪಲಿನ ಒಂದು ಪಟ್ಟಣದಂತೆ ಇದೆ. ರಾಜಧಾನಿ ಮಸ್ಕತ್ ಸೇರಿದಂತೆ ಇತರೆ ನಗರಗಳಾದ ಸಲಾಲ್ಹ, ಸೋಹಾರ್, ಸೂರ್ ಮುಂತಾದೆಡೆ ಮುಖ್ಯರಸ್ತೆ ಬದಿಯಲ್ಲಿರುವ ಹಚ್ಚ ಹಸಿರಿನ ಉದ್ಯಾನವನಗಳು, ಕೈತೋಟಗಳು, ಗಿಡ ಮರಗಳನ್ನು ನೋಡಿದೊಡನೆ, ಪ್ರವಾಸಿಗರಿಗೆ ಆಶ್ಚಯವಾಗುವುದು ಖಂಡಿತ. ಒಮಾನಿನ ಕೆಲೆವೆಡೆ ಮಣ್ಣು ಫಲವತ್ತಾಗಿದೆ, ಇಲ್ಲಿನ ಗಿಡ ಮರಗಳಿಗೆ ಸೂಕ್ತ ಪ್ರಮಾಣದ ನೀರನ್ನು ಪೂರೈಸಿದರೆ, ಗಿಡ ಮರಗಳು ಸೊಂಪಾಗಿ ಬೆಳೆಯುತ್ತವೆ. ಮನೆಮುಂದಿನ ಜಾಗಗಳಲ್ಲಿ ಬಹುತೇಕ ಜನರು ವಿವಿಧ ರೀತಿಯ ತರಕಾರಿಗಳನ್ನು ಬೆಳೆಯುವುದಲ್ಲದೆ, ಅಲಂಕಾರಿಕ ಗಿಡಗಳನ್ನು ಬೆಳೆಸುತ್ತಾರೆ.

 

ಈ ಅರಬ್ ರಾಷ್ಟ್ರಗಳಲ್ಲಿ ತ್ಯಾಜ್ಯನೀರನ್ನ ಸಂಸ್ಕರಿಸಿ ಆ ನೀರನ್ನು ಈ ಉದ್ಯಾನವನಗಳಿಗೆ ಸರಬರಾಜು ಮಾಡಲಾಗುತ್ತದೆ. ಹನಿ ನೀರಾವರಿ ಪದ್ದತಿ, ಸ್ಪ್ರಿಂಕ್ಲರ್ ಪದ್ದತಿ ಮುಖಾಂತರ ಗಿಡಗಳಿಗೆ ಅಗತ್ಯವಾದ ನೀರನ್ನು ಪೂರೈಸಲಾಗುತ್ತಿದೆ. ಇಲ್ಲಿನ ತ್ಯಾಜ್ಯ ನೀರು ಸಂಸ್ಕರಣ ಘಟಕಗಳಿಂದ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಂಸ್ಕರಿಸಿ ಗೊಬ್ಬರವನ್ನಾಗಿ ಪರಿವರ್ತಿಸಿ ಉದ್ಯಾನವನಗಳಿಗೆ ಪೂರೈಸಲಾಗುತ್ತಿದೆ.

 

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಪಡೆಯುವುದರ ಜತೆಗೆ ಕೃಷಿ ಕ್ಷೇತ್ರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸಲು ಕೆಲಸ ಮಾಡುವುದು ಮಾತ್ರವಲ್ಲದೆ, ಕೃಷಿಯನ್ನು ಸಹ ಒಂದು ಉದ್ಯಮವನ್ನಾಗಿ ಪರಿಗಣಿಸಿ, ಕೃಷಿ ಚಟುವಟಿಕೆಗೆ ಬೇಕಾದ ಅಗತ್ಯವಾದ ಸೌಕರ್ಯಗಳನ್ನು ಅರಬ್ ರಾಷ್ಟ್ರಗಳು ಕಲ್ಪಿಸಿಕೊಡುತ್ತಿವೆ.  ಕೃಷಿ ವಲಯದಲ್ಲಿ ಹೂಡಿಕೆ ಮಾಡುವ ಸಲುವಾಗಿ ವಿದೇಶಿ ಹೂಡಿಕೆದಾರರನ್ನು ಪ್ರೋತ್ಸಾಹಿಸಲು ಕೃಷಿ ಉಪಕರಣಗಳ ಆಮದು ಸುಂಕ  ವಿನಾಯಿತಿ, ಕಡಿಮೆ ಬಡ್ಡಿದರದ ಸಾಲ ಇತ್ಯಾದಿ ಸೌಕರ್ಯಗಳನ್ನು ನೀಡಲಾಗಿದೆ. ಕೃಷಿಯ ಜತೆಗೆ ಅತ್ಯಾಧುನಿಕ ತಂತ್ರಜ್ನಾನದ ಸುಸಜ್ಜಿತ ಹೈನುಗಾರಿಕೆ ಫಾರಂಗಳು, ಕೋಳಿ ಸಾಕಾಣಿಕೆ ಕೇಂದ್ರಗಳು ಸಾಕಷ್ಟಿವೆ. ಇಲ್ಲಿ ಉತ್ಪಾದನೆಯಾಗುವ ಉತ್ತಮ ಗುಣಮಟ್ಟದ ಹಾಲು, ಮೊಸರು, ಬೆಣ್ಣೆ, ತುಪ್ಪ ದೇಶದೆಲ್ಲೆಡೆ ಬಳಕೆಯಾಗುವುದಲ್ಲದೆ ಇತರೆ ರಾಷ್ಟ್ರಗಳಿಗೂ ಸಹ ರಫ್ತು ಮಾಡಲಾಗುತ್ತಿದೆ.

 ಇಲ್ಲಿನ ಮಣ್ಣಿನಲ್ಲಿ ಬೆಳೆಯುವ ಕೃಷಿ ಉತ್ಪನ್ನಗಳ ಜತೆಗೆ ನಾಗರೀಕರ ಅಗತ್ಯಕ್ಕೆ ತಕ್ಕಂತೆ ಬೇಕಾದ ಕುರಿ ಕೋಳಿ ಮುಂತಾದವುಗಳನ್ನ ಇಲ್ಲಿ ಬೆಳೆಸಿ  ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿರುವುದು ಒಂದು ಉತ್ತಮ ಬೆಳವಣಿಗೆ. ಯಾವುದೇ ಒಂದು ರಾಷ್ಟ್ರ, ಆಹಾರದಂತಹ ವಿಷಯದಲ್ಲಿ ಬೇರೆಯವರ ಅವಲಂಬನೆಯಲ್ಲಿರುವುದು ಸರಿಯಲ್ಲ. ಈಗ ಸಾಕಷ್ಟು ಹಣ ಇದೆ ಎಂದು ಬೇಕಾದದ್ದನ್ನು ರಫ್ತು ಮಾಡಿಕೊಂಡು ಜೀವಿಸುವುದು ಸಹ ಉತ್ತಮ ನಿರ್ಧಾರವಲ್ಲ, ಮುಂದಿನ ಕನಿಷ್ಟ ಐವತ್ತು ವರ್ಷಗಳಿಗೆ ಮತ್ತು ಮುಂದಿನ ಪೀಳಿಗೆಗೆ ಬೇಕಾದ ಸೂಕ್ತ ಯೋಜನೆಗಳನ್ನ ಹಾಕಿಕೊಂಡು ಮುಂದಡಿಯಿಡುವುದು ಉತ್ತಮ ಲಕ್ಷಣ. ಆ ನಿಟ್ಟಿನಲ್ಲಿ, ಅರಬ್ ರಾಷ್ಟ್ರಗಳು ಮುಂದಾಲೋಚನೆಯಿಂದ ಸ್ವಾವಲಂಬನೆಯತ್ತ ಎಚ್ಚರಿಕೆಯ ಹೆಜ್ಜೆಇಡುತ್ತಿರುವುದು ಇತರೆ ರಾಷ್ಟ್ರಗಳಿಗೆ ಒಂದು ಪಾಠ ಎಂದು ಹೇಳಬೇಕು.

ಬರಹ:- ಪಿ.ಎಸ್.ರಂಗನಾಥ

ಮಸ್ಕತ್ - ಒಮಾನ್ ರಾಷ್ಟ್ರ

Click below headings